ಕೇರಳದಲ್ಲಿ ಭಾರೀ ಮಳೆ: ಪ್ರವಾಹದ ಭೀತಿ
ಇಂದು ಕೂಡ ಕೇರಳದಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನೂ 2-3 ದಿನ ಕೇರಳದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ರಸ್ತೆಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಹಲವು ಡ್ಯಾಂಗಳ ಗೇಟುಗಳನ್ನು ತೆರೆಯಲಾಗಿದೆ.
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೇರಳದಲ್ಲಿ ನಿನ್ನೆ ಸಂಜೆಯಿಂದ ಮಳೆ ಹೆಚ್ಚಾಗಿದೆ. ಇಂದು ಕೂಡ ಕೇರಳದಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಅಕ್ಟೋಬರ್ 7 ರಿಂದ 13ರ ಅವಧಿಯಲ್ಲಿ ಕೇರಳದಲ್ಲಿ ವಾಡಿಕೆ ಮಳೆಗಿಂತ ಶೇಕಡ 166ರಷ್ಟು ಅಧಿಕ ಮಳೆ ಬಿದ್ದಿದೆ ಎಂದು ಹವಾಮಾನ ತಜ್ಞರು ಹೇಳಿದ್ದು, ಇದು ಮಿನಿ ಮೇಘ ಸ್ಫೋಟ ಎಂದು ಹೇಳಿದ್ದಾರೆ. ಪರಿಸ್ಥಿತಿ ತೀರಾ ಕಳವಳಕಾರಿಯಾಗಿದ್ದು, ಸುಧಾರಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವ್ಯಕ್ತಪಡಿಸಿದ್ದಾರೆ.ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಶನಿವಾರ ಪ್ರವಾಹದಿಂದಾಗಿ ಒಂದೇ ಕುಟುಂಬದ ಮೂರು ಮಂದಿ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಕೊಟ್ಟಾಯಂ ಜಿಲ್ಲೆಯ ಪ್ಲಾಪಲ್ಲಿ ಎಂಬಲ್ಲಿ ಭೀಕರ ಭೂಕುಸಿತ ಸಂಭವಿಸಿ ಮೂರು ಮನೆಗಳು ಹಾಗು ಒಂದು ಅಂಗಡಿ ನೆಲಸಮವಾಗಿದೆ. ಘಟನೆ ನಡೆದ ಸಂದರ್ಭದಲ್ಲಿ 10 ಮಂದಿ ಆ ಸ್ಥಳದಲ್ಲಿದ್ದರು ಎನ್ನಲಾಗಿದ್ದು, ಈ ಪ್ರದೇಶ ಇತರೆಡೆಯ ಜತೆ ಸಂಪರ್ಕ ಕಡಿದುಕೊಂಡಿದೆ. ಇದರಿಂದಾಗಿ ಪರಿಹಾರ ಮತ್ತು ಶೋಧ ಕಾರ್ಯಾಚರಣೆಗೆ ಕಷ್ಟವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.