ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ ಚರ್ಚಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿಯ ನೂತನ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಮಳೆ ನೀರು ಹರಿಯುವಿಕೆಗೆ ಯಾವುದೇ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಗಾಳಿ ಮಳೆಯಿಂದ ವಿದ್ಯುತ್ ಕಂಬ ಮುರಿದು ಅನಾಹುತ ಸಂಭವಿಸಿದಲ್ಲಿ ಕೂಡಲೇ ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಚಾರ್ಮಡಿ ಘಾಟಿಯಲ್ಲಿ ಭೂಕುಸಿತ ಅಥವಾ ಮರಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಲ್ಲಿ ಕೂಡಲೇ ತೆರವುಗೊಳಿಸಲು ಕ್ಷಿಪ್ರ ತಂಡವನ್ನು ಸಿದ್ಧವಾಗಿರಿಸುವಂತೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ರಿಗೆ ಸೂಚಿಸಿದರು.
ಸದರಿ ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಅಪರ ಜಿಲ್ಲಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಉಪ ಅರಣ್ಯ ಸಂರಕ್ಷಣಾಧಿಕಾರಿ, ಹೆದ್ದಾರಿ ಭೂಸ್ವಾಧೀನ ಅಧಿಕಾರಿ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಮಹಾನಗರ ಪಾಲಿಕೆ, ರಾಷ್ಟ್ರೀಯ ಹೆದ್ದಾರಿ ವಿಭಾಗಗಳ ಕಾರ್ಯಕಾರಿ ಇಂಜಿನಿಯರ್ ಗಳು ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
