ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ : ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ” ನೊಂದ ಹಿಂದು ಕಾರ್ಯಕರ್ತರೆಂಬ ಚಪ್ಪಲಿ ಹಾರ ಹಾಕಲಾಗಿರುವ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ನರಿಮೊಗರು ನಿವಾಸಿಗಳಾದ ವಿಶ್ವನಾಥ್ ಮತ್ತು ಮಾಧವ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ವೇಳೆ ಅವರೊಂದಿಗೆ ಇನ್ನೂ ಹಲವರಿದ್ದರು ಎಂಬ ಮಾಹಿತಿ ಮೇರೆಗೆ ಪತ್ತೆ ಕಾರ್ಯ ನಡೆಸಿದ ಪೊಲೀಸರು ತಡ ರಾತ್ರಿ 7 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ. ವಶಕ್ಕೆ ಪಡೆದುಕೊಂಡಿರುವ ಆರೋಪಿಗಳನ್ನು ಬೇಲೇಬಲ್ ಕೇಸ್ ಮಾಡಿ ಬಿಡಲಾಗಿದ್ದು, ಅವರ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲಿಸಿ, ನೋಟೀಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಒಟ್ಟು 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.ವಿಷಯ ತಿಳಿಯುತ್ತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.

Related Posts

Leave a Reply

Your email address will not be published.