ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ
ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ.ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ
ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡು ಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.
ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು. ಈಗ ಜಾರಿಯಲ್ಲಿರುವ ಮಾರ್ಗಸೂಚಿಯನ್ನು ಜನರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದೆ ಮತ್ತೆ ಸೋಂಕು ಹೆಚ್ಚಾದ್ರೆ, ಈ ನಿಯಮಗಳನ್ನು ಅನಿವಾರ್ಯವಾಗಿ ನಿಲ್ಲಿಸಲಾಗುವುದು. ಜನರು ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡಿ, ಸೋಂಕು ಕಡಿಮೆ ಮಾಡಲು ಸಹಕಾರಿಸಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.