ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು ಅವರನ್ನು ಅವರ ಅಭಿಮಾನಿಗಳು ಸ್ವಾಗತಿಸಿದರು.
ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಸೋಮವಾರ ಪ್ರದಾನ ಮಾಡಲಾಯಿತು. ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಯಿತು.
ಗ್ರಾಮೀಣ ಮಕ್ಕಳಿಗೆ ಉಚಿತ ಶಿಕ್ಷಣ ಹರೇಕಳ ಹಾಜಬ್ಬರು ಕಳೆದ 21 ವರ್ಷಗಳಿಂದ ತನ್ನೂರು ಹರೇಕಳದ ನ್ಯೂ ಪಡ್ಪು ಗ್ರಾಮದಲ್ಲಿ ಗ್ರಾಮೀಣ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದಾರೆ. ಇದಕ್ಕಾಗಿ ಯಾರ ಮುಂದೆಯೂ ಕಾಡಿ ಬೇಡದೇ ಮಂಗಳೂರು ನಗರದಲ್ಲಿ ಕಿತ್ತಳೆ ಹಣ್ಣನ್ನು ಮಾರಿ, ಶಾಲೆಯ ಖರ್ಚುನ್ನು ನೋಡಿಕೊಳ್ಳುತ್ತಿದ್ದಾರೆ. ಸಾಮಾನ್ಯರಲ್ಲಿ ಅತೀ ಸಾಮಾನ್ಯರಂತೆ ಇರುವ ಹರೇಕಳ ಹಾಜಬ್ಬರ ವ್ಯಕ್ತಿತ್ವಕ್ಕೆ ಎಲ್ಲರೂ ಮಾರುಹೋಗಿದ್ದಾರೆ. 2004ರಲ್ಲಿ ಹರೇಕಳ ಹಾಜಬ್ಬರ ಶಿಕ್ಷಣ ಪ್ರೀತಿಯನ್ನು ಮೊದಲ ಬಾರಿಗೆ ಗುರುತಿಸಲಾಯಿತು. ಆ ಬಳಿಕ ರಾಷ್ಟ್ರದ ವಿವಿಧ ಮಾಧ್ಯಮಗಳು ಹರೇಕಳ ಹಾಜಬ್ಬರನ್ನು ಗುರುತಿಸಿ ಗೌರವಿಸಿದೆ.