ಸಂಬಳ ನೀಡುವಂತೆ ಒತ್ತಾಯಿಸಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ನೌಕರರ ಧರಣಿ ಸತ್ಯಾಗ್ರಹ….

ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಧರಣೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆರಂಭಿಸಿದ್ದು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಈ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ.

ಅಕ್ಟೋಬರ್ ನಲ್ಲಿ ಅರ್ಧ ಸಂಬಳ ನೀಡಿದ್ದು, ಬಳಿಕ ಸಂಬಳವನ್ನೇ ನೀಡದೆ ಕೇಂದ್ರ ಕಛೇರಿಯ ಅಧಿಕಾರಿಗಳು ನೌಕರರ ವಿರುದ್ಧ ದೌರ್ಜನ್ಯ ಎಸಗುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ಯ ಉನ್ನತ ಅಧಿಕಾರಿಗಳೂ ಮನವಿ ಮಾಡಲಾಗಿದೆ. ಉಸ್ತುವಾರಿ ಸಚಿವರು ಮನವಿಗೆ ಸ್ಪಂದಿಸಿ ತಕ್ಷಣವೇ ಸಂಬಳ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಇಂದಿನಿಂದ ಅಕ್ಟೋಬರ್ 25 ರ ತನಕ ಧರಣಿ ಸತ್ಯಾಗ್ರಹ ಮುಂದುವರಿಸಲಾಗುವುದು. ಸರಕಾರ ಈ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರದೇ ಹೋದಲ್ಲಿ 25 ರ ಬಳಿಕ ಅಮರಣಾಂತ ಉಪವಾಸ ಧರಣಿ ಆರಂಭಿಸಲಾಗುವುದು ಎಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಿಎಂಎಸ್ ಘಟಕದ ಅಧ್ಯಕ್ಷ ಗಿರಿಶ್ ಮಳಿ ಎಚ್ಚರಿಸಿದ್ದಾರೆ. ಅಲ್ಲದೆ ಸಂಬಳ ನೀಡದೆ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ವೈಯಕ್ತಿಕ ಕೇಸು ದಾಖಲಿಸಲಾಗುವುದು ಎಂದರು.

Related Posts

Leave a Reply

Your email address will not be published.