HomeFresh Newsಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಗಳು ಇರುತ್ತದೆ.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಯವರು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ಕಾಯ್ದೆ 1965 ನಿಯಮ 21(1) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು 2021ರ ಆಗಸ್ಟ್ 3 ರಿಂದ 15 ರವರೆಗೆ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಲಾಗಿದ್ದು, ನಿಷೇಧಾಜ್ಞೆ ಜಾರಿಗೊಂಡಿರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟ ವೈನ್‍ಶಾಪ್ ಅಥವಾ ಬಾರ್‍ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಗಳನ್ನು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments