HomeFresh News80ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿಯಿಂದ ಧ್ವಜಾರೋಹಣ

80ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿಯಿಂದ ಧ್ವಜಾರೋಹಣ

ನವದೆಹಲಿ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಅವರನ್ನು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ರಾಷ್ಟ್ರಗೀತೆ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳೊಂದಿಗೆ ಸ್ವಾತಂತ್ರ್ಯೋತ್ಸವದ ಆಚರಣೆ ಆರಂಭವಾಯಿತು.

ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ ಇದೇ ಮೊದಲ ಬಾರಿಗೆ ಕೆಂಪುಕೋಟೆಯಲ್ಲಿ ‘ವಂದೇ ಮಾತರಂ’ ಗೀತೆಯನ್ನು ಅಧಿಕೃತವಾಗಿ ಪ್ರಸ್ತುತಪಡಿಸಲಾಯಿತು. ಧ್ವಜಾರೋಹಣದ ಬಳಿಕ 21 ಸುತ್ತು ಕುಶಾಲ ತೋಪುಗಳ ಗೌರವ ಸಲ್ಲಿಸಲಾಯಿತು. ನಂತರ ಪ್ರಧಾನಿ ಮೋದಿ ಅವರು ದೇಶವನ್ನುದ್ದೇಶಿಸಿ ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದರು.

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಇದೇ ಮೊದಲ ಬಾರಿಗೆ ‘ವಂದೇ ಮಾತರಂ’ ಮೊಳಗಿರುವುದು ಐತಿಹಾಸಿಕ ಕ್ಷಣ ಎಂದು ಪ್ರಧಾನಿ ಮೋದಿ ಬಣ್ಣಿಸಿದರು. ದೇಶವು ‘ವಂದೇ ಮಾತರಂ’ ರಚನೆಯ 150ನೇ ವರ್ಷಾಚರಣೆ ಮಾಡುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ ಎಂದರು.

ಕಳೆದ 12 ವರ್ಷಗಳಲ್ಲಿ ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಶ್ರಮಿಸಿದ ದೇಶದ ಜನತೆಯನ್ನು ಪ್ರಧಾನಿ ಅಭಿನಂದಿಸಿದರು. ದಲಿತರು, ಹಿಂದುಳಿದವರು, ಬುಡಕಟ್ಟು ಸಮುದಾಯದವರು, ಗ್ರಾಮೀಣ ಹಾಗೂ ನಗರ ಪ್ರದೇಶದ ಜನರು, ಬಡವರು, ಮಧ್ಯಮ ವರ್ಗ, ಯುವಕರು, ಹಿರಿಯರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಕೊಡುಗೆಯನ್ನು ಅವರು ಸ್ಮರಿಸಿದರು.

ಭಾರತ ತನ್ನ ರಾಷ್ಟ್ರೀಯ ಹಿತಾಸಕ್ತಿಗಳ ರಕ್ಷಣೆಗಾಗಿ ಇತರ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬೇಕು. ಸ್ವಾವಲಂಬನೆಯ ಸಂಕಲ್ಪದೊಂದಿಗೆ ‘ಆತ್ಮನಿರ್ಭರ ಭಾರತ’ ನಿರ್ಮಾಣದತ್ತ ಸಾಗಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು. ಪ್ರತಿಯೊಬ್ಬ ಭಾರತೀಯನೂ ‘ಮೇಕ್ ಇನ್ ಇಂಡಿಯಾ’, ‘ಸ್ವದೇಶಿ’ ಹಾಗೂ ‘ವೋಕಲ್ ಫಾರ್ ಲೋಕಲ್’ ಅಭಿಯಾನಗಳೊಂದಿಗೆ ಕೈಜೋಡಿಸಬೇಕು ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments