ಕಡಬ, ಜೂ. 17: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆಯು ಕಡಬದ ಶ್ರೀ ಜಯದುರ್ಗಾ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಡೆಯುತ್ತಿರುವ ಶೌರ್ಯ ಕಾರ್ಯಕ್ರಮವು ಕಡಬ ತಾಲೂಕಿನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದು, ವಿಪತ್ತು ನಿರ್ವಹಣೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಶ್ಲಾಘಿಸಿದರು.
ಶೌರ್ಯ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ್ ಪಟಗಾರ ಮಾತನಾಡಿ, ಶೌರ್ಯ ಕಾರ್ಯಕ್ರಮದ ಆಶಯ ಹಾಗೂ ಉದ್ದೇಶಗಳನ್ನು ವಿವರಿಸಿದರು. ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೌರ್ಯ ಘಟಕಗಳ ಮಾಸಿಕ ಸಭೆಗಳು, ಶ್ರಮದಾನ ಕಾರ್ಯಕ್ರಮಗಳು ಹಾಗೂ ಘಟಕಗಳ ಬಲವರ್ಧನೆ ಕುರಿತಂತೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.

ಕಡಬ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ 25 ಸದಸ್ಯರ ತುರ್ತು ಸ್ಪಂದನಾ ಘಟಕವನ್ನು ರಚಿಸಲಾಯಿತು.
ಸಭೆಯಲ್ಲಿ ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಮೇಲ್ವಿಚಾರಕ ನಿತೇಶ್ ಕೆ., ಕಡಬ ತಾಲೂಕಿನ ವಿವಿಧ ಮೇಲ್ವಿಚಾರಕರು, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಂಯೋಜಕರು, ಘಟಕ ಪ್ರತಿನಿಧಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕಡಬ ವಲಯದ ಮೇಲ್ವಿಚಾರಕ ವಿಜೇಶ್ ಜೈನ್ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ಸೋಮೇಶ್ ವಂದಿಸಿದರು.

