ಕಿನ್ನಿಗೋಳಿ: ರೋಟರಿ ಆಂಗ್ಲ ಮಾಧ್ಯಮ ಶಾಲೆ ಕಿನ್ನಿಗೋಳಿಯಲ್ಲಿ ಕಿನ್ನಿಗೊಳಿ ಪಟ್ಟಣ ಪಂಚಾಯತ್ ಸಹಯೋಗದಲ್ಲಿ “ನಮ್ಮ ನಡೆ ಸ್ವಚ್ಛತೆಯ ಕಡೆ” ಎಂಬ ಘೋಷವಾಕ್ಯದೊಂದಿಗೆ ವೈಜ್ಞಾನಿಕ ಘನ ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಹಸಿ ಕಸ, ಒಣ ಕಸ , ಸ್ಯಾನಿಟರಿ ವೇಸ್ಟ್, ಬಯೋಹಜಾರ್ಡ್ (ಜೈವ ಅಪಾಯಕಾರಿ) ಕಸಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಸುರಕ್ಷಿತವಾಗಿ ವಿಲೇವಾರಿ ಮಾಡುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಯಿತು.
ಡಾ. ಅಭಿಷೇಕ್ ಆನಂದ ಹಾಗೂ ಡಾ ರಕ್ಷಾ ಜೆ ಪೂಜಾರಿಯವರು ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವುದರಿಂದ ಪರಿಸರ ಸಂರಕ್ಷಣೆ, ಆರೋಗ್ಯ ರಕ್ಷಣೆ ಹಾಗೂ ಸ್ವಚ್ಛ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂಬುದರ ಬಗ್ಗೆ ಮಕ್ಕಳಲ್ಲಿ ಜಾಗೃತಿಯನ್ನು ಮೂಡಿಸಿದರು.
ಸಾಹಸ್ ಎನ್ ಜಿಒ ಮೇಲ್ವಿಚಾರಕರಾದ ಶ್ರೀ ರವೀಂದ್ರರವರು ವಿಧ್ಯಾರ್ಥಿಗಳಿಗೆ ತ್ಯಾಜ್ಯದ ವಿಂಗಡಣೆಯ ಬಗ್ಗೆ ಮಾಹಿತಿಯನ್ನು ನೀಡಿ ಸ್ಪರ್ಧೆಯನ್ನು ನಡೆಸಿ ಬಹುಮಾನ ವಿತರಿಸಿದರು.
ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸಿ ಸ್ವಚ್ಛತೆಯ ಮಹತ್ವವನ್ನು ಅರಿತುಕೊಂಡರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕವೃಂದ, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕಿ ಶ್ರೀಮತಿ ಸುನಿತಾ ಗುರುರಾಜ್ ರವರು ಸ್ವಾಗತಿಸಿ, ಶ್ರೀಮತಿ ಗಂಗಾದೇವಿಯವರು ಕಾರ್ಯಕ್ರಮ ನಿರೂಪಿಸಿದರು.


