ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರುಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಗುರುವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ವಿಜಯೇಂದ್ರ ಅವರು ಶುಕ್ರವಾರ ಬೆಳಗ್ಗೆ ಸುಮಾರು 8 ಗಂಟೆಗೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಇತ್ತೀಚೆಗೆ ಅಡ್ಡ ಮತದಾನದ ಆರೋಪಗಳ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಬೇಕೆಂದು ವಿಜಯೇಂದ್ರ ಹೇಳಿಕೆ ನೀಡಿದ್ದರು. ಆದರೆ ಈ ವಿಚಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆಣೆ-ಪ್ರಮಾಣ ಕಾರ್ಯಕ್ರಮವನ್ನು ಬಳಿಕ ಕೈಬಿಡಲಾಗಿತ್ತು. ಈ ಬೆಳವಣಿಗೆಗಳ ನಡುವೆಯೇ ವಿಜಯೇಂದ್ರ ಅವರು ಒಬ್ಬರೇ ಧರ್ಮಸ್ಥಳಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಆದರೆ, ಅವರ ಭೇಟಿಯ ಉದ್ದೇಶದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿವಿಧ ಊಹಾಪೋಹಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

