ಪಡುಬಿದ್ರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ವತಿಯಿಂದ ಮೂಡುಬೆಟ್ಟು ಬರ್ಪಾಣಿ ದಿವಂಗತ ಜಗನ್ನಾಥ ಶೆಟ್ಟಿ ಅವರ ಗದ್ದೆಯಲ್ಲಿ ಎರಡು ದಿನಗಳ ಕಾಲ ವಿದ್ಯಾರ್ಥಿಗಳಿಗಾಗಿ ‘ಸೌಟ್ಸ್ ಗೈಡ್ಸ್ ನಡಿಗೆ ಕೃಷಿಯ ಕಡೆ’ ಶಿಬಿರವು ಯಶಸ್ವಿಯಾಗಿ ನಡೆಯಿತು.

ಶಿಬಿರವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದ್ದರು. ಜಿಲ್ಲಾ ಮುಖ್ಯ ಆಯುಕ್ತರಾದ ಇಂದ್ರಾಳಿ ಜಯಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಿಬಿರದ ವಿಶೇಷ ಆಕರ್ಷಣೆಯಾಗಿ ಕಾಪು ಪೊಲೀಸ್ ಠಾಣೆಯ ಠಾಣಾಧಿಕಾರಿ ತೇಜಸ್ವಿ ಅವರು ಸಮವಸ್ತ್ರ ಧರಿಸಿಯೇ ಗದ್ದೆಗಿಳಿದು ಟಿಲ್ಲರ್ ಮೂಲಕ ಉಳುಮೆ ನಡೆಸಿ ಎಲ್ಲರ ಗಮನ ಸೆಳೆದರು. ಬಳಿಕ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಅವರು ವಿದ್ಯಾರ್ಥಿಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿಗಳೊಂದಿಗೆ ಸೇರಿ ನೇಜಿ ನಾಟಿ ನಡೆಸಿದರು.

ಈ ಸಂದರ್ಭದಲ್ಲಿ ಯುವ ಕೃಷಿಕ ಮೂಡುಬೆಟ್ಟು ಬರ್ಪಾಣಿ ಸಂತೋಷ್ ಜೆ. ಶೆಟ್ಟಿ ಅವರ ಯುವಜನರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಪ್ರಶಂಸಿಸಿ, ಕೃಷಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು.
ವೇದಿಕೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವೀಂದ್ರ ನಾಯಕ್, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು, ಕಾಪು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎನ್. ಎಂ. ಹೆಗಡೆ, ಲಯನ್ಸ್ ಕ್ಲಬ್ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಂತೋಷ್ ಶೆಟ್ಟಿ ಬರ್ಪಾಣಿ, ಯೂತ್ ಫ್ರೆಂಡ್ಸ್ ಮಣಿಪಾಲ, ವಾತ್ಸಲ್ಯ ಉಡುಪಿ ಜಿಲ್ಲೆ ಹಾಗೂ ಪರಸ್ಮೈ ಸ್ಟುಡಿಯೋ ಇವರ ಸಹಕಾರದೊಂದಿಗೆ ಶಿಬಿರವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಯಶಸ್ವಿ ಸಂಘಟನೆಯನ್ನು ಶ್ರೀಮತಿ ಸುಮನ ಶೇಖರ್ ನಿರ್ವಹಿಸಿದರು.


