ಕೊಕ್ಕಡ:ಹತ್ಯಡ್ಕ ಗ್ರಾಮದ ಪಾರ್ಪಿಕಲ್ಲು ಸಮೀಪದ ದರ್ಬೆತಡ್ಕದಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ಧ್ವಂಸಗೊಳಿಸಿ ಅಪಾರ ಹಾನಿ ಉಂಟುಮಾಡಿದ ಘಟನೆ ನಡೆದಿದೆ.
ದಿನಕರ ಗೋಖಲೆ ಅವರ ಮನೆಯ ಸಮೀಪದ ತೋಟಕ್ಕೆ ನುಗ್ಗಿದ ಕಾಡಾನೆ, ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ಮುರಿದು ನಾಶಪಡಿಸಿದ್ದು, ಇದರಿಂದ ರೈತರಿಗೆ ಗಣನೀಯ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ. ಬುಧವಾರ ಬೆಳಿಗ್ಗೆ ತೋಟಕ್ಕೆ ತೆರಳಿದ ವೇಳೆ ಬೆಳೆ ನಾಶವಾಗಿರುವುದು ಬೆಳಕಿಗೆ ಬಂದಿದೆ.

ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು, ರೈತರು ಆತಂಕದ ವಾತಾವರಣದಲ್ಲಿ ಕೃಷಿ ಚಟುವಟಿಕೆ ನಡೆಸುವಂತಾಗಿದೆ. ಪದೇ ಪದೇ ತೋಟಗಳಿಗೆ ಕಾಡಾನೆಗಳು ನುಗ್ಗಿ ಬೆಳೆ ಹಾನಿ ಉಂಟುಮಾಡುತ್ತಿರುವುದರಿಂದ ಕೃಷಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಳೆ ಹಾನಿಯ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರವನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಕಾಡಾನೆಗಳ ನಿರಂತರ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ, ರೈತರ ಜೀವ ಹಾಗೂ ಆಸ್ತಿಯನ್ನು ರಕ್ಷಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಎಲಿಫೆಂಟ್ ಟಾಸ್ಕ್ ಫೋರ್ಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


