ಪುತ್ತೂರು: ಆ.31ರಂದು ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲು ಅನುಮತಿ ಕೋರಿ ಸಂಘಟನೆಯೊಂದು ಆ.27ರಂದು ಬೆಳಿಗ್ಗೆ ಅರ್ಜಿ ಸಲ್ಲಿಸಿದ್ದು, ಪ್ರತಿಭಟನಾ ಸ್ಥಳವು ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲದ ಹಿನ್ನೆಲೆಯಲ್ಲಿ ಸೂಕ್ತ ಸ್ಥಳವನ್ನು ಗುರುತಿಸಿ ಮರು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅರ್ಜಿದಾರರಿಗೆ ಸರಕಾರದ ಮಾರ್ಗಸೂಚಿಗಳ ಪ್ರತಿಯನ್ನು ನೀಡಲಾಗಿದ್ದು, ನಿಗದಿತ ನಿಯಮಗಳನ್ನು ಪಾಲಿಸುವಂತೆ ತಿಳಿಸಲಾಗಿದೆ. ಇದೇ ವೇಳೆ ಆ.31ರಂದು ಮತ್ತೊಂದು ಸಂಘಟನೆಯು ಪುತ್ತೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಆದರೆ, ಸದ್ರಿ ಸಂಘಟನೆಯು ಕಾರ್ಯಕ್ರಮ ನಡೆಸಲು ಈವರೆಗೆ ಯಾವುದೇ ಅನುಮತಿಗಾಗಿ ಅರ್ಜಿ ಸಲ್ಲಿಸಿಲ್ಲ ಎಂದು ತಿಳಿಸಲಾಗಿದೆ. ಸಂಬಂಧಿಸಿದ ಸಂಘಟನೆಯು ಕಾರ್ಯಕ್ರಮಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ, ಸರಕಾರದ ಮಾರ್ಗಸೂಚಿಗಳನ್ವಯ ಬೇರೊಂದು ದಿನಾಂಕವನ್ನು ನಿಗದಿಪಡಿಸಿ ಅನುಮತಿ ಪಡೆಯಲು ಸೂಚಿಸಲಾಗುವುದು ಎಂದು ತಿಳಿಸಲಾಗಿದೆ. ಪ್ರತಿಭಟನೆ ಸೇರಿದಂತೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುನ್ನ, ಕಾರ್ಯಕ್ರಮದ ಆಯೋಜಕರು ಸಂಬಂಧಿಸಿದ ಇಲಾಖೆಯಿಂದ ಅಗತ್ಯ ಅನುಮತಿ ಪಡೆದಿದ್ದಾರೆಯೇ ಎಂಬುದನ್ನು ಸಾರ್ವಜನಿಕರು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಅನುಮತಿ ಇಲ್ಲದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಾರ್ವಜನಿಕರು ಯಾವುದೇ ರೀತಿಯ ಅನಗತ್ಯ ಗೊಂದಲಕ್ಕೆ ಒಳಗಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.


