ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಅಡಿಯಲ್ಲಿ ಕಾರ್ಯನಿರ್ವಹಿಸುವ ‘ಶೌರ್ಯ’ ವಿಪತ್ತು ನಿರ್ವಹಣಾ ತುರ್ತು ಸ್ಪಂದನಾ ತಂಡದ ಕಾಪು ತಾಲೂಕು ಮಟ್ಟದ ತರಬೇತಿ ಕಾರ್ಯಕ್ರಮವು ಕಾಪುವಿನ ಬಿಲ್ಲವರ ಸಂಘದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಾಪು ಪೊಲೀಸ್ ಠಾಣೆಯ ASI ರವೀಶ್ ಹೊಳ್ಳ ಉದ್ಘಾಟಿಸಿದರು. ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು.
ವಿಜಯವಾಡ NDRFನ ಇನ್ಸ್ಪೆಕ್ಟರ್ ಶಾಂತಿಲಾಲ್ ಜಟಿಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿಪತ್ತು ನಿರ್ವಹಣೆ ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಕಾಪು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಮಾತನಾಡಿ, ಶೌರ್ಯ ತಂಡದ ಸಮಾಜಮುಖಿ ಸೇವಾ ಕಾರ್ಯಗಳಿಗೆ ಶುಭ ಹಾರೈಸಿದರು.

ಜೈವಂತ ಪಟಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಜು ಪಾಣಾರ, ಯೋಜನಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ಶೌರ್ಯ ತಂಡದ ಸದಸ್ಯರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪರಿಕಲ್ಪನೆಯಂತೆ ರೂಪುಗೊಂಡಿರುವ ‘ಶೌರ್ಯ’ ತಂಡವು ಪ್ರವಾಹ, ಭೂಕುಸಿತ, ಬೆಂಕಿ ಅವಘಡ ಸೇರಿದಂತೆ ವಿವಿಧ ವಿಪತ್ತುಗಳ ಸಂದರ್ಭಗಳಲ್ಲಿ ಸ್ಥಳೀಯ ಮಟ್ಟದಲ್ಲಿ ತುರ್ತು ಸ್ಪಂದನೆ ನೀಡಿ ಸರ್ಕಾರದ ರಕ್ಷಣಾ ಪಡೆಗಳಿಗೆ ಸಹಕಾರ ನೀಡುವ ಉದ್ದೇಶ ಹೊಂದಿದೆ.
ಸ್ಥಳೀಯ ಯುವಕರನ್ನು ಸ್ವಯಂಸೇವಕರಾಗಿ ಆಯ್ಕೆ ಮಾಡಿಕೊಂಡು ಅವರಿಗೆ ಪ್ರಥಮ ಚಿಕಿತ್ಸೆ, ಈಜು, ರಕ್ಷಣಾ ಕಾರ್ಯ ಹಾಗೂ ವಿಪತ್ತು ನಿರ್ವಹಣೆಯ ಕುರಿತು ತರಬೇತಿ ನೀಡಲಾಗುತ್ತಿದೆ. ಇದರೊಂದಿಗೆ ಶ್ರಮದಾನ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ಅಗತ್ಯವಿರುವ ಬಡ ಕುಟುಂಬಗಳ ಮನೆಗಳ ದುರಸ್ತಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿಯೂ ಶೌರ್ಯ ತಂಡ ಸಕ್ರಿಯವಾಗಿ ತೊಡಗಿಸಿಕೊಂಡಿದೆ.

