ಉಡುಪಿ, ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಾ. ಸರ್ವೇಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣಾರ್ಥ ಶಿಕ್ಷಕರ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಡಾ.ರಾಧಾಕೃಷ್ಣನ್ ಅವರು ನೀಡಿದ
ಮಹತ್ವದ ಕೊಡುಗೆಯನ್ನು ಸ್ಮರಿಸಿ ಪುಷ್ಪನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಹಾಗೂ ಎನ್ಐಟಿಕೆ ಸುರತ್ಕಲ್ನ ಮಾಜಿ ನಿರ್ದೇಶಕ ಡಾ. ಎಚ್.ವಿ. ಸುಧಾಕರ್ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲೆ ದೀರ್ಘಕಾಲದ ಸಕಾರಾತ್ಮಕ ಪ್ರಭಾವ ಬೀರುವುದೇ ಶಿಕ್ಷಕರ ನಿಜವಾದ ಸಾಧನೆಯಾಗಿದೆ. ಶಿಕ್ಷಕರು ಕರುಣೆ, ಸಹಾನುಭೂತಿ ಹಾಗೂ ಉತ್ತಮ ಮೌಲ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಶ್ರೀ ಸೋದೆ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.
ಸಂಸ್ಥೆಯ ಕಾರ್ಯದರ್ಶಿ ಶ್ರೀ ರತ್ನಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ. ನಾಗರಾಜ ಭಟ್ ಸ್ವಾಗತಿಸಿ, ವಿದ್ಯಾರ್ಥಿಗಳು ಹಾಗೂ ಸಮಾಜದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಮಹತ್ವದ ಪಾತ್ರವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ಗಳು, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.


