ಕಾಪು, ಜು.20: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ಕೋಟ್ಯಂತರ ರೂಪಾಯಿ ಮೌಲ್ಯದ ಕಾಣಿಕೆ, ದೇಣಿಗೆ ಹಾಗೂ ಹುಂಡಿ ಹಣದ ಕಳವು ಪ್ರಕರಣವನ್ನು ಖಂಡಿಸಿ, ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಇದರಲ್ಲಿ ಭಾಗಿಯಾಗಿರುವ ಮತ್ತು ಪರೋಕ್ಷವಾಗಿ ಸಹಕರಿಸಿರುವ ರಾಜಕೀಯ ಮುಖಂಡರನ್ನು ಬಂಧಿಸಿ, ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಜುಲೈ 21ರಂದು ಸಂಜೆ 6 ಗಂಟೆಗೆ ಬೃಹತ್ ಪ್ರತಿಭಟನಾ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.
ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆಯುವ ಈ ಪ್ರತಿಭಟನಾ ಜಾಥಾ ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಮುಂಭಾಗದಿಂದ ಆರಂಭವಾಗಿ ಕಾಪು ಪೇಟೆಯಲ್ಲಿ ಸಮಾವೇಶಗೊಳ್ಳಲಿದೆ.
ಪ್ರತಿಭಟನಾ ಸಭೆಯಲ್ಲಿ ಖ್ಯಾತ ವಾಗ್ಮಿಗಳಾದ ಲಕ್ಷ್ಮೀಶ ಉಬ್ಬರಡ್ಕ ಮತ್ತು ಸುಧೀರ್ ಕುಮಾರ್ ಮುಳ್ಳಿ ಮುಖ್ಯ ಭಾಷಣ ಮಾಡಲಿದ್ದಾರೆ.
ಸತ್ಯ ಮತ್ತು ನ್ಯಾಯಕ್ಕಾಗಿ ನಡೆಯುವ ಈ ಹೋರಾಟದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನಾ ಜಾಥಾವನ್ನು ಯಶಸ್ವಿಗೊಳಿಸಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷ ವೈ. ಸುಕುಮಾರ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

