ಮಂಗಳೂರಿನ ಕಾವೂರಿನ ಮೂರು ಮನೆಗಳ ಬಾವಿಗಳಲ್ಲಿ ನೀರಿಗೆ ಬದಲಾಗಿ ಡೀಸೆಲ್ ಉಕ್ಕಿ ಬರುತ್ತಿರುವ ಆಘಾತಕಾರಿ ಘಟನೆ ನಡೆದಿದೆ. ನೀರಿನಲ್ಲಿ ೨೮% ಡೀಸೆಲ್ ಇರುವುದು ಪತ್ತೆಯಾಗಿದ್ದು, ಹತ್ತಿರದ ಪೆಟ್ರೋಲ್ ಬಂಕ್ನಿAದ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಬಂಕ್ ಮಾಲೀಕರು ಈ ಬಗ್ಗೆ ನಿರಾಕರಿಸಿದ್ದಾರೆ. ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೂಡಾ ಕೇಳಿಬಂದಿದೆ.
ಬಾವಿಯ ನೀರನ್ನು ಎಷ್ಟು ಬಾರಿ ಮೋಟಾರ್ ಹಾಕಿ ಪೂರ್ತಿ ಖಾಲಿ ಮಾಡಿದರೂ ಸಹ, ಮತ್ತೆ ಜಿನುಗುವ ನೀರಿನೊಂದಿಗೆ ಡೀಸೆಲ್ನ ದಪ್ಪನೆಯ ಪದರ ಮೇಲೇಳುತ್ತಲೇ ಇದೆ. ಇದರಿಂದಾಗಿ ಕಾವೂರಿನ ಈ ಕುಟುಂಬಗಳಿಗೆ ಕುಡಿಯುವ ನೀರು ಇರಲಿ, ಕನಿಷ್ಠ ಮನೆ ಬಳಕೆ ಅಥವಾ ಪಾತ್ರೆ ತೊಳೆಯಲೂ ನೀರಿಲ್ಲದಂತಾಗಿದೆ. ಮನೆಗಳ ಅತ್ಯಂತ ಸಮೀಪದಲ್ಲೇ ಪೆಟ್ರೋಲ್ ಬಂಕ್ ಒಂದಿದ್ದು, ಅದರ ಅಂಡರ್ಗ್ರೌAಡ್ ಟ್ಯಾಂಕ್ನಿAದಲೇ ಡೀಸೆಲ್ ಲೀಕ್ ಆಗಿ ಅಂತರ್ಜಲ ಸೇರಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಸಿಬ್ಬಂದಿ, ‘ನಮ್ಮ ಡೀಸೆಲ್ ಸ್ಟಾಕ್ನಲ್ಲಿ ಯಾವುದೇ ವ್ಯತ್ಯಾಸ ಬಂದಿಲ್ಲ, ಸೋರಿಕೆಯೂ ಆಗುತ್ತಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ. ಇತ್ತ ಬಾವಿ ನೀರು ಬಳಕೆಗೆ ಯೋಗ್ಯವಲ್ಲ ಎಂದು ವರದಿ ಬಂದಿದ್ದರೂ, ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸುವ ಸೌಜನ್ಯ ತೋರಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ರಹಸ್ಯ ಸೋರಿಕೆ ಹೇಗೆ ಆಗುತ್ತಿದೆ ಎಂಬುದನ್ನು ತಕ್ಷಣವೇ ಪತ್ತೆ ಹಚ್ಚಿ, ಇಡೀ ಪ್ರದೇಶದ ಅಂತರ್ಜಲ ಕಲುಷಿತಗೊಳ್ಳುವುದನ್ನು ತಡೆಯಬೇಕೆಂದು ಕಾವೂರು ನಿವಾಸಿಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
