ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಸೆಪ್ಟೆಂಬರ್ 18, 2026ರಂದು ಮಂಗಳೂರಿನ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಂಪುಟ ದರ್ಜೆಯ ಸಚಿವರ ಸಂಚಾರದ ಹಿನ್ನೆಲೆಯಲ್ಲಿ ನಗರದ ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಸೆಪ್ಟೆಂಬರ್ 17ರ ಸಂಜೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಮಂಗಳೂರಿಗೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 18ರ ಬೆಳಿಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪ್ರಜಾಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ ಮೇರಿಹಿಲ್ನಲ್ಲಿರುವ ಹೆಲಿಪ್ಯಾಡ್ ಮೂಲಕ ಉಡುಪಿಗೆ ತೆರಳಿ, ನಂತರ ಮಂಗಳೂರಿಗೆ ವಾಪಸ್ಸಾಗಿ ತಂಗಲಿದ್ದಾರೆ. ಸೆಪ್ಟೆಂಬರ್ 19ರ ಬೆಳಿಗ್ಗೆ ಗಣ್ಯರು ಮಂಗಳೂರಿನಿಂದ ನಿರ್ಗಮಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಗಣ್ಯರ ಭದ್ರತೆ ಹಾಗೂ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸೆ.17ರ ಸಂಜೆ ಹಾಗೂ ಸೆ.19ರ ಬೆಳಿಗ್ಗೆ ಗಣ್ಯರ ಸಂಚಾರ ಮಾರ್ಗ
ಬಜಪೆ ವಿಮಾನ ನಿಲ್ದಾಣ – ಕಾವೂರು – ಬೋಂದೆಲ್ – ಮೇರಿಹಿಲ್ – ಕೆಪಿಟಿ – ಕದ್ರಿ ಕಂಬಳ – ಬಂಟ್ಸ್ ಹಾಸ್ಟೆಲ್ – ಡಾ. ಬಿ.ಆರ್. ಅಂಬೇಡ್ಕರ್ ಜಂಕ್ಷನ್ – ಹಂಪನಕಟ್ಟೆ – ಕ್ಲಾಕ್ ಟವರ್ – ಹ್ಯಾಮಿಲ್ಟನ್ ಜಂಕ್ಷನ್.
ಸೆ.18ರ ಬೆಳಿಗ್ಗೆ ಗಣ್ಯರ ಸಂಚಾರ ಮಾರ್ಗ
ಹ್ಯಾಮಿಲ್ಟನ್ ಜಂಕ್ಷನ್ – ಕ್ಲಾಕ್ ಟವರ್ – ಹಂಪನಕಟ್ಟೆ – ಡಾ. ಬಿ.ಆರ್. ಅಂಬೇಡ್ಕರ್ ಜಂಕ್ಷನ್ – ಕೆಪಿಟಿ ಜಂಕ್ಷನ್ – ನಂತೂರು ವೃತ್ತ – ಪಂಪ್ವೆಲ್ – ನಾಗುರಿ – ಬಜಾಲ್ ಕ್ರಾಸ್ (ಪ್ರಜಾಸೌಧ) – ಪಡೀಲ್ ಜಂಕ್ಷನ್.
ಸಾರ್ವಜನಿಕರಿಗೆ ಸೂಚಿಸಲಾದ ಪರ್ಯಾಯ ಮಾರ್ಗಗಳು
ಬದ್ರಿಯಾ ಜಂಕ್ಷನ್ನಿಂದ ಹ್ಯಾಮಿಲ್ಟನ್ ಜಂಕ್ಷನ್ ಕಡೆಗೆ:
ಹೋಟೆಲ್ ತಾಜ್ ವಿವಾಂತ ಮುಂಭಾಗದ ಮಾರ್ಗದ ಬದಲು ಬದ್ರಿಯಾ ಜಂಕ್ಷನ್ – ನಿಲೇಶ್ವರ ರಸ್ತೆ – ರೊಸಾರಿಯೋ ರಸ್ತೆ ಮೂಲಕ ಸಂಚರಿಸಬಹುದು.
ಹ್ಯಾಮಿಲ್ಟನ್ ಜಂಕ್ಷನ್ನಿಂದ ಬದ್ರಿಯಾ ಜಂಕ್ಷನ್ ಕಡೆಗೆ:
ಹ್ಯಾಮಿಲ್ಟನ್ ಜಂಕ್ಷನ್ – ನೆಲ್ಲಿಕಾಯಿ ರಸ್ತೆ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.
ಪಂಪ್ವೆಲ್ – ನಾಗುರಿ – ಪಡೀಲ್ ಮಾರ್ಗದ ವಾಹನಗಳು:
ನಂತೂರು ವೃತ್ತ – ಕೈಕಂಬ – ಮರೋಳಿ ಮಾರ್ಗ ಅಥವಾ ತೊಕ್ಕೊಟ್ಟು – ದೇರಳಕಟ್ಟೆ – ಮುಡಿಪು – ಬೊಳ್ಯಾರ್ – ಮೆಲ್ಕಾರ್ ಮಾರ್ಗವನ್ನು ಬಳಸಬಹುದು.
ಬಜಾಲ್ ಕ್ರಾಸ್ (ಪ್ರಜಾಸೌಧ) – ಬಜಾಲ್/ಕಂಕನಾಡಿ ರೈಲ್ವೆ ನಿಲ್ದಾಣ ಮಾರ್ಗ:
ಪಡೀಲ್ ಬಜಾಲ್ ಕ್ರಾಸ್ ಬದಲಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಂದುವರಿದು ಜಪ್ಪಿನಮೊಗರು ದ್ವಾರ – ಬಜಾಲ್ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.
ತೊಕ್ಕೊಟ್ಟಿನಿಂದ ಪಂಪ್ವೆಲ್ ಕಡೆಗೆ ಬರುವ ವಾಹನಗಳು:
ಮಹಾಕಾಳಿಪಡ್ಪು – ಮಂಗಳಾದೇವಿ ಮೂಲಕ ನಗರಕ್ಕೆ ಪ್ರವೇಶಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ನಿರ್ಬಂಧ
ಗಣ್ಯರ ಸಂಚಾರವಿರುವ ಮೇಲ್ಕಂಡ ಮಾರ್ಗಗಳ ರಸ್ತೆ ಬದಿಯಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಆಂಬ್ಯುಲೆನ್ಸ್ ಹಾಗೂ ಇತರ ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಯಾವುದೇ ಅಡಚಣೆ ಇರುವುದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.


