HomeFresh Newsಶರಣ್ ಪಂಪ್ ವೆಲ್ ಭಾಷಣ ಜನಾಂಗ ಹತ್ಯೆಗೆ ಪ್ರಚೋದನೆ. ಕಠಿಣ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿ :...

ಶರಣ್ ಪಂಪ್ ವೆಲ್ ಭಾಷಣ ಜನಾಂಗ ಹತ್ಯೆಗೆ ಪ್ರಚೋದನೆ. ಕಠಿಣ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿ : ಡಿವೈಎಫ್ಐ ಆಗ್ರಹ

ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಸುರತ್ಕಲ್ ಜಂಕ್ಷನ್ ನಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕ ಫಾಝಿಲ್ ಕೊಲೆಯನ್ನು “ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ ಕೊಲೆ” ಎಂದು ಬಹಿರಂಗವಾಗಿ ಹೇಳಿದ್ದಾರೆ. ಇನ್ನಷ್ಟು ಇಂತಹ ದಾಳಿಗಳು ನಡೆಯಲಿದೆ ಎಂದು ಬೆದರಿಕೆ ಹಾಕಿದ್ದಾರೆ. ಗುಜರಾತ್ ಗಲಭೆಯ ಎರಡು ಸಾವಿರ ಜನರ ಕೊಲೆಯನ್ನೂ ಸಮರ್ಥಿಸಿಕೊಂಡಿದ್ದಾರೆ.

ಇದು ತೀರಾ ಆತಂಕಕಾರಿ ಬೆಳವಣಿಗೆ. ನಾಗರಿಕ ಸಮಾಜದಲ್ಲಿ ಇದು ಭೀತಿಯನ್ನು ಮೂಡಿಸಿದೆ. ಫಾಝಿಲ್ ಕೊಲೆಗೆ ವಿಎಚ್ ಪಿ, ಬಿಜೆಪಿ ಮುಖಂಡರ ಬೆಂಬಲ ದೊರಕಿರುವ ಅನುಮಾನ ಕೊಲೆ ನಡೆದ ಸಂದರ್ಭದಲ್ಲೇ ವ್ಯಕ್ತವಾಗಿತ್ತು. ಪೊಲೀಸರು ರಾಜಕೀಯ ಒತ್ತಡದಿಂದ ಕೊಲೆಯ ಪಿತೂರಿದಾರರನ್ನು ರಕ್ಷಿಸುತ್ತಿದ್ದಾರೆ ಎಂದು ಫಾಝಿಲ್ ಕುಟುಂಬ ಆರೋಪಿಸಿತ್ತು. ಶರಣ್ ಪಂಪ್ ವೆಲ್ ಭಾಷಣ ಈ ಅನುಮಾನ, ಆರೋಪವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಪುಷ್ಟೀಕರಿಸಿದೆ.

ಶರಣ್ ಪಂಪ್ ವೆಲ್ ಇಂದಿನ ಅತಿರೇಕದ ದ್ವೇಷ ಭಾಷಣ, ಕೊಲೆಗಳ ಸಮರ್ಥನೆ, ಬೆದರಿಕೆ ಜನಾಂಗ ಹತ್ಯೆಗೆ ಪ್ರಚೋದನೆ ನೀಡುವಂತಿದೆ‌. ನಿರುದ್ಯೋಗ, ಬಡತನದಿಂದ ಹತಾಶಗೊಂಡಿರುವ ಯುವಕರ ಕೈಗೆ ತಲವಾರು ನೀಡಿ ಗಲಭೆಗಿಳಿಸುವ, ಇಡೀ ಸಮಾಜವನ್ನು ಕ್ರಿಮನಲೀಕರಣಗೊಳಿಸುವ, ಚುನಾವಣೆ ಸನಿಹದಲ್ಲಿರುವ ಸಂದರ್ಭ ಮತೀಯ ಧ್ರುವೀಕರಣ ರಾಜಕೀಯ ದುರುದ್ದೇಶಗಳನ್ನು ಹೊಂದಿದೆ. ಹಾಗೂ ಶರಣ್ ಪಂಪ್ ವೆಲ್ ಗೆ ಬಿಜೆಪಿ ಸರಕಾರದ ಬೆಂಬಲವೂ ದೊರಕಿರುವುದು ಎದ್ದು ಕಾಣುತ್ತಿದೆ.

ಅಮಾಯಕ ಫಾಝಿಲ್ ಕೊಲೆಯ ಸಂದರ್ಭ ರಾಜ್ಯ ಸರಕಾರ ಸಾಂತ್ವನ, ಪರಿಹಾರ ಒದಗಿಸದೆ ಫಾಝಿಲ್ ಕುಟುಂಬದೊಂದಿಗೆ ತಾರತಮ್ಯದಿಂದ ಕೆಟ್ಟದಾಗಿ ನಡೆದುಕೊಂಡಿತ್ತು. ಪ್ರಕರಣದ ತನಿಖೆಯೂ ದುರ್ಬಲ ನೆಲೆಯಲ್ಲಿ ನಡೆದಿತ್ತು. ಈಗ ಫಾಝಿಲ್ ಕೊಲೆಯನ್ನು ಭಜರಂಗ ದಳದ ಕಾರ್ಯಕರ್ತರ ಶೌರ್ಯದ ಸಂಕೇತ ಎಂದು ಭಾಷಣ ಬಿಗಿಯಲು‌ ಅವಕಾಶ ಒದಗಿಸಿ ಆ ಸಂತ್ರಸ್ತ ಕುಟುಂಬವನ್ನು ಮತ್ತಷ್ಟು ನೋವುಣ್ಣುವಂತೆ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ವಿರುದ್ದ ಇನ್ನಷ್ಟು ದ್ವೇಷ ಹರಡುವ ಯತ್ನವೂ ಇದರ ಹಿಂದಿದೆ. ಸರಕಾರಿ ಪ್ರಾಯೋಜಿತ ಇಂತಹ ಯೋಜನಾಬದ್ದ ಜನಾಂಗ ದ್ವೇಷದ ಕೆಲಸಗಳು ಮುಸ್ಲಿಂ ಸಮುದಾಯದೊಳಗಡೆ ನಕಾರಾತ್ಮಕ ಶಕ್ತಿಗಳ ಬೆಳವಣಿಗೆಗೂ ಕುಮ್ಮಕ್ಕು‌ ನೀಡುತ್ತದೆ. ಇದು ನಮ್ಮ ಸಮಾಜವನ್ನು ಅಪಾಯಕಾರಿ ವಿಭಜನೆಯೆಡೆಗೆ ಒಯ್ಯುತ್ತದೆ.

ಕೊಲೆ, ನರಮೇಧದ ಸಮರ್ಥನೆಯ ಭಾಷಣಕ್ಕಾಗಿ ಶರಣ್ ಪಂಪ್ ವೆಲ್ ರನ್ನು ಕಠಿಣ ಕಾಯ್ದೆಯಡಿ ಬಂಧಿಸಬೇಕು, ಫಾಝಿಲ್ ಕೊಲೆಯಲ್ಲಿ ಶರಣ್ ಪಂಪ್ ವೆಲ್ ಮತ್ತಿತರ ನಾಯಕರ ಪಾತ್ರದ ಕುರಿತು ಮರು ತನಿಖೆ ಮಾಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ. ನಾಗರಿಕ ಸಮಾಜ ಒಂದಾಗಿ ಶರಣ್ ಪಂಪ್ ವೆಲ್ ಭಾಷಣವನ್ನು ಖಂಡಿಸಬೇಕು ಹಾಗೂ ಕ್ರಮಕ್ಕಾಗಿ ಒತ್ತಾಯಿಸಬೇಕು ಎಂದು ವಿನಂತಿಸುತ್ತದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments