ಮಂಗಳೂರಿನ ಬೆಂಗ್ರೆ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮೀನುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಮಂಗಳೂರಿನ ಬೆಂಗ್ರೆಯಲ್ಲಿ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ ನಡೆದಿದೆ. ನೀರಿನ ಮೇಲ್ಮೈಯಲ್ಲಿ ನೂರಾರು ಮೀನುಗಳು ಸತ್ತು ತೇಲಿಬಂದಿವೆ.
ಈ ಹಠಾತ್ ಘಟನೆಯಿಂದಾಗಿ ಇಡೀ ಬೆಂಗ್ರೆ ಪ್ರದೇಶದಲ್ಲಿ ಸದ್ಯ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ನಿವಾಸಿಗಳು ಮತ್ತು ಮೀನುಗಾರರು ಈ ದೃಶ್ಯವನ್ನು ಕಂಡು ಕಂಗಾಲಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನೀರಿನ ಮಾಲಿನ್ಯ ಅಥವಾ ನೀರಿನಲ್ಲಿ ಆಮ್ಲಜನಕದ ಕೊರತೆಯೇ ಈ ಮೀನುಗಳ ಸಾಮೂಹಿಕ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಗಂಭೀರತೆಯನ್ನು ಅರಿತ ಸ್ಥಳೀಯ ನಿವಾಸಿಗಳು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರನ್ನು ನೀಡಿದ್ದಾರೆ.


ಸುಲ್ತಾನ್ ಬತ್ತೇರಿಯಿಂದ ತಣ್ಣೀರು ಬಾವಿ ಸೇತುವೆ ಕಾಮಗಾರಿಯಿಂದಾಗಿ ನದಿಯ ನೀರನ್ನು ತಡೆ ಮಾಡಿದ್ದರಿಂದ ಈ ರೀತಿಯ ಸಮಸ್ಯೆ ಆಗಿದೆ ಎಂಬುವುದು ಸ್ಥಳೀಯರ ಆರೋಪವಾಗಿದೆ..
ಸದ್ಯಕ್ಕೆ ಮೀನುಗಳ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಅಧಿಕಾರಿಗಳ ತನಿಖೆಯ ನಂತರವಷ್ಟೇ ನೈಜ ಕಾರಣ ಏನೆಂಬುದು ಬಹಿರಂಗವಾಗಲಿದೆ. ಈ ಕುರಿತು ಅಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.


