ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಮಾರಾಟ ಆರೋಪ: ಬೈಂದೂರು ತಹಶೀಲ್ದಾರ್ ಸ್ಥಳಕ್ಕೆ ಭೇಟಿ, ಪರಿಶೀಲನೆ
ಕುಂದಾಪುರ: ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಅಂಗಡಿಯೊಂದರಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆ ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.
ಲಾಕ್ ಡೌನ್ ಹಿನ್ನೆಲೆ ಶಾಲಾ ಮಕ್ಕಳಿಗೆ ವಿತರಿಸುವ ಅಡುಗೆ ಎಣ್ಣೆ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತೆಗ್ಗರ್ಸೆ ಅಂಗಡಿಯೊಂದರಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗ್ರಾಹಕರೋರ್ವರು ಅಂಗಡಿಯಲ್ಲಿ ಖರೀದಿಸಿದ ಎಣ್ಣೆಯ ಪ್ಯಾಕೇಟ್ ಪರಿಶೀಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಶಾಲಾ ಮಕ್ಕಳ ಬಿಸಿಯೂಟದ ಯೋಜನೆಯ ಎಣ್ಣೆ ಅಂಗಡಿಯಲ್ಲಿ ಹೇಗೆ ಬಂತು ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ. ಈ ಬಗ್ಗೆ ತಹಸೀಲ್ದಾರರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದಾಗ ಅವರು ಕರೆಯನ್ನು ಸ್ವೀಕರಿಸಲಿಲ್ಲ.
ದಿನಸಿ ಅಂಗಡಿಯಲ್ಲಿ ಬಿಸಿಯೂಟ ಯೋಜನೆಯ ಎಣ್ಣೆ ಖರೀದಿಸಿದ ಗ್ರಾಹಕರೊಬ್ಬರು ಇದನ್ನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡುವ ಮೂಲಕ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ತಹಸೀಲ್ದಾರ್ ಅಂಗಡಿಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.