ಕಡಬ, ಮೇ 7: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ವತಿಯಿಂದ ಪದಾಧಿಕಾರಿಗಳ ಸಭೆಯು ಕಡಬದ ಶ್ರೀ ಜಯ ದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಿದರು. ಬಳಿಕ ಕಡಬ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ವಾರ್ಷಿಕ ವರದಿ ವಾಚಿಸಿದರು.
ದಕ್ಷಿಣ ಕನ್ನಡ ಜಿಲ್ಲೆ-2 ನಿರ್ದೇಶಕ ಬಾಬು ನಾಯ್ಕ ಮಾತನಾಡಿ, ಜನಜಾಗೃತಿ ಕಾರ್ಯಕ್ರಮಗಳಾದ “ಸ್ವಾಸ್ಥ್ಯ ಸಂಕಲ್ಪ” ಇನ್ನಷ್ಟು ಪರಿಣಾಮಕಾರಿಯಾಗಿ ನಡೆಯಬೇಕೆಂದು ತಿಳಿಸಿದರು. ಜನಜಾಗೃತಿ ವಿಭಾಗದ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ 2026-27ನೇ ಸಾಲಿನ ಕ್ರಿಯಾ ಯೋಜನೆ ಹಾಗೂ ಗುರಿ ಸಾಧನೆ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಕಡಬ ಯೋಜನಾ ಕಚೇರಿ ವ್ಯಾಪ್ತಿಯ ವಲಯವಾರು ಸಾಧನ ವರದಿಯನ್ನು ಮಂಡಿಸಲಾಯಿತು. ತಾಲೂಕಿನ 20 ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ಹಮ್ಮಿಕೊಳ್ಳುವುದು ಹಾಗೂ ಆಗಸ್ಟ್ ತಿಂಗಳಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸುವ ಕುರಿತು ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನೂತನ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಇಂದು ಶೇಖರ್ ಶೆಟ್ಟಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸೀತಾರಾಮ ಗೌಡ ಪೊಸವಲಿಕೆ, ಜಯಾನಂದ ಬಂಟ್ರಿಯಾಲ್, ಕರುಣಾಕರ ಗೋಗಟೆ, ವರ್ಗೀಸ್, ಗಿರೀಶಂಕರ ಸುಲಾಯ, ಪಿ.ವೈ. ಕುಸುಮ, ಸರೋಜಿನಿ ಆಚಾರ್ಯ, ಶಿವಪ್ರಸಾದ್ ಮೈಲೇರಿ, ಮಹಮದ್ ಅಲಿ, ಗಣೇಶ್ ಕೈಕುರೆ, ಶಾರದಾ, ಮಮತಾ ಹಾಗೂ ಮೀನಾಕ್ಷಿ ಉಪಸ್ಥಿತರಿದ್ದರು.
ಕಡಬ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸಭೆಯ ವರದಿ ಮಂಡಿಸಿದರು. ಮೇಲ್ವಿಚಾರಕ ವಿಜೇಶ್ ಜೈನ್ ಸ್ವಾಗತಿಸಿದರು. ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಕಡಬ ತಾಲೂಕು ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ
RELATED ARTICLES
