ಎಲ್ಲರೂ ಜೊತೆಗೂಡಿ ಕಾಪು ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ: ಲಾಲಾಜಿ ಮೆಂಡನ್

ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ. ಪಕ್ಷವನ್ನು ಎರಡೂವರೆ ಸಾವಿರ ಮತಗಳಿಂದ 75 ಸಾವಿರ ಮತಗಳವರೆಗೆ ಬೆಳೆಸಿದ್ದೇವೆ. ಮುಂದೆಯೂ ಬಿಜೆಪಿ ಕ್ಷೇತ್ರವನ್ನಾಗಿ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸುತ್ತೇನೆ ಎಂದು ಬಿಜೆಪಿ ಟಿಕೆಟ್ ವಂಚಿತ ಲಾಲಾಜಿ ಆರ್. ಮೆಂಡನ್ ಹೇಳಿದರು.
ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಲಾಲಾಜಿ ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ ಚರ್ಚೆ ನಡೆಸಿದರು. ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಲಾಲಾಜಿ ಮೆಂಡನ್ ಅವರು, ಕಳೆದ ಬಾರಿಯ ಚುನಾವಣೆಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರು ನನಗೆ ಪೂರ್ಣ ಸಹಕಾರ ನೀಡಿದ್ದರು. ಈ ಬಾರಿ ನಾನು ಅವರ ಜತೆಗಿದ್ದು ಬಿಜೆಪಿಯನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಇಂದಿನಿಂದಲೇ ಪಕ್ಷ ಸಂಘಟನೆ ನಡೆಸಿ, ಪಕ್ಷದ ಗೆಲುವುಗಾಗಿ ಶ್ರಮಿಸಲಿದ್ದೇವೆ ಎಂದರು.
ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪಕ್ಷದ ಮುಖಂಡರಾದ ರತ್ನಾಕರ ಹೆಗ್ಡೆ, ಕುತ್ಯಾರು ನವೀನ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೋಪಾಲ ಕೃಷ್ಣ ರಾವ್, ಶರಣ್ ಮಟ್ಟು, ಸತೀಶ್ ಸಾಲ್ಯಾನ್, ಸುನೀತಾ ನಾಯಕ್ ಮೊದಲದವರು ಉಪಸ್ಥಿತರಿದ್ದರು.