HomeFresh Newsಕಾರ್ಕಳ : ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ

ಕಾರ್ಕಳ : ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ

ಕಾರ್ಕಳ ಹಿರ್ಗಾನ ಶ್ರೀಕುಂದೇಶ್ವರ ಕ್ಷೇತ್ರ ವತಿಯಿಂದ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಯನ್ನು ಜಾತ್ರೆಯ ಸಾಂಸ್ಕೃತಿಕ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಾಡಿದ ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಬ್ರಹ್ಮದೇವ ಬ್ರಹ್ಮಲೋಕದವರು, ವಿಷ್ಣು ವೈಕುಂಠಲೋಕದಿಂದ ಭೂಲೋಕಕ್ಕೆ ಬರುವವರು ಆದರೆ ಈಶ್ವರ ಮಾತ್ರ ಭಾರತದೇಶದ ಹಿಮಾಲಯದ ಕೈಲಾಸದವರು. ಹೀಗಾಗಿ ಈಶ ಸ್ವದೇಶಿ ಎಂದು ವ್ಯಾಖ್ಯಾನಿಸಿದರು. ಬಡವರ ಕಣ್ಣೀರು ಒರೆಸಿದರೆ, ಅಶಕ್ತರಿಗೆ ಕೊಡುವ ಸಹಾಯ ದೇವರಿಗೆ ಸೇರುತ್ತದೆ. ಹೀಗಾಗಿ ಬಡವರಲ್ಲಿ ದೇವರನ್ನು ಕಾಣಬೇಕು ಎಂದರು.
ನಿರಂತರವಾಗಿ ಶ್ರೇಷ್ಠ ಕಲಾವಿದರನ್ನು ಗುರುತಿಸಿ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಾ ಬಂದಿರುವ ಕುಂದೇಶ್ವರ ಕ್ಷೇತ್ರದ ಆಡಳಿತ ಮಂಡಳಿ ಈ ಬಾರಿ ಯಕ್ಷಗಾನದಲ್ಲಿ ವಿಶೇಷ ಸಾಧನೆ ಮಾಡಿದ ರಕ್ಷಿತ್‌ ಪಡ್ರೆಗೆ ನೀಡುವ ಮೂಲಕ ಯುವ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದೆ ಎಂದರು.
ಕದ್ರಿ ನವನೀತ ಶೆಟ್ಟಿ ಮಾತನಾಡಿ, 60 ವರ್ಷಗಳ ಹಿಂದೆ ಸೀನು ಸೀನರಿ ವಿಶಿಷ್ಟ ಯಕ್ಷಗಾನ ಮಂಗಳೂರಲ್ಲಿ ನಡೆಯುತ್ತಿತ್ತು. ಇದನ್ನು ಮತ್ತೆ ರಂಗದಲ್ಲಿ ತರಬೇಕು ಎಂದು ಉರ್ವ ಸಾಯಿ ಶಕ್ತಿ ಕಲಾ ಬಳಗ ಯೋಚಿಸಿದಾಗ ಸಮರ್ಥ ಯಕ್ಷಗುರು ರಕ್ಷಿತ್‌ ಪಡ್ರೆ ಅದರ ನೇತೃತ್ವ ವಹಿಸಿ, ನಿಟ್ಟೆ ಎಂಜಿನಿಯರಿಂಗ್‌ ವಿದ್ಯಾರ್ಥಿಗಳೇ ಹೆಚ್ಚಾಗಿ ಇರುವ ಅಪೂರ್ವ ತಂಡ ಕಟ್ಟಿದರು. ಅವರಿಗೆ ಅರ್ಹತೆಗೆ ಅನುಗುಣವಾಗಿಯೇ ಈ ಪ್ರಶಸ್ತಿ ಲಭಿಸಿದೆ ಎಂದರು.

ಪ್ರಶಸ್ತಿ ಸ್ವೀಕರಿಸಿದ ರಕ್ಷಿತ್‌ ಶೆಟ್ಟಿ ಪಡ್ರೆ ಮಾತನಾಡಿ, ಯುವ ಕಲಾವಿದರು ಶಿಸ್ತಿನಿಂದ ತಮ್ಮ ಪಾತ್ರ ನಿರ್ವಹಿಸಿ, ಹಂತ ಹಂತವಾಗಿ ಮೇಲೆ ಬನ್ನಿ, ಯಾವತ್ತೂ ಅಹಂಕಾರ ತೋರಬೇಡಿ ಎಂದರು. ಇತ್ತೀಚೆಗೆ ಮಾನ, ಸನ್ಮಾನ ಪ್ರಶಸ್ತಿಗಳು ಬಹುತೇಕ ಇನ್‌ಫ್ಲುಯೆನ್ಸ್‌ ಮೇಲೆ, ಆದರೆ ಯಾವುದೇ ಭೇಟಿ, ಸಂಪರ್ಕ ಇಲ್ಲದೇ ಇದ್ದರೂ ಕುಂದೇಶ್ವರದವರು, ಯುವ ಕಲಾವಿದನನ್ನು ಗುರುತಿಸಿ ಈ ಶ್ರೇಷ್ಠ ಪ್ರಶಸ್ತಿ ನೀಡಿದ್ದು ಖುಷಿ ತಂದಿದೆ ಎಂದರು.
ಹನುಮಗಿರಿ ಮೇಳದಲ್ಲಿ ಕಲಾವಿದನಾಗಿರುವಾಗಲೇ ಕಾಲೇಜು ವಿದ್ಯಾಭ್ಯಾಸ ಮಾಡುತ್ತಾ ಎಂಎಸ್ಸಿ ಮುಗಿಸಿದೆ. ಈ ಸಂದರ್ಭ ಸದಾ ಪ್ರೋತ್ಸಾಹಿಸಿದ ಮೇಳದ ಯಜಮಾನರಾದ ಟಿ. ಶ್ಯಾಮ್‌ ಭಟ್‌ ಅವರನ್ನು ಕೃತಜ್ಞತೆ ಸ್ಮರಿಸುತ್ತೇನೆ. ಈ ಸಮ್ಮಾನವನ್ನು ಹೆತ್ತ ತಾಯಿ, ಗುರುಗಳಾದ ಗಿರೀಶ್‌ ನಾವಡ, ಲೋಕೇಶ್‌, ದೇವಿಪ್ರಸಾದ್‌ ಮತ್ತು ಭರತನಾಟ್ಯ ಗುರು ಸುಮಂಗಲಾ ರತ್ನಾಕರ್‌ ಅವರಿಗೆ ಅರ್ಪಿಸುತ್ತೇನೆ ಎಂದರು.
ಕಾರ್ಯಕ್ರಮ ಸಂಯೋಜಿಸಿದ ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಮಾತನಾಡಿ, ಕುಂದೇಶ್ವರ ಕ್ಷೇತ್ರದ ಧರ್ಮದರ್ಶಿ ದಿ. ರಾಘವೇಂದ್ರ ಭಟ್‌ ಅರ್ಥಧಾರಿಗಳಾಗಿದ್ದು, ಶೃಂಗೇರಿ ಮೇಳದ ಸಂಚಾಲಕರೂ ಆಗಿದ್ದರು. ಅವರ ನೆನಪಲ್ಲಿ ಕ್ಷೇತ್ರದ ವತಿಯಿಂದ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ಕ್ಷೇತ್ರ ಆಡಳಿತ ವರ್ಗದ ಗಂಗಾ ಆರ್.ಭಟ್‌, ವೇ.ಮೂ. ಕೃಷ್ಣ ರಾಜೇಂದ್ರ ಭಟ್‌, ವೇ.ಮೂ. ರವೀಂದ್ರ ಭಟ್‌, ಅಜೆಕಾರ್‌ ಬಾಲಕೃಷ್ಣ ಶೆಟ್ಟಿ, ರಂಜಿನಿ ಲಕ್ಷ್ಮೀನಾರಾಯಣ, ರಂಗಿಣಿ ಉಪೇಂದ್ರ ರಾವ್‌, ಸುಮನಾ ಸುಧೀಂದ್ರ ಭಟ್‌ ಇದ್ದರು. ಪ್ರತಿಜ್ಞಾ ಪ್ರಾರ್ಥಿಸಿದರು.

ಇದೇ ಸಂದರ್ಭ ಛಾಯಾಗ್ರಹಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಶ್ರೀಗುರು ಸ್ಟುಡಿಯೋದ ಶರತ್‌ ಕಾನಂಗಿ ಅವರಿಗೆ ಕುಂದೇಶ್ವರ ಕಲಾಭೂಷಣ ಗೌರವ ಅರ್ಪಿಸಲಾಯಿತು.

ಶಾಸಕ ವಿ. ಸುನಿಲ್‌ ಕುಮಾರ್‌ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ, ಧಾರ್ಮಿಕ ಕಾರ್ಯಕ್ರಮಗಳ ಜತೆಯಲ್ಲಿ ನಾಟಕ, ಯಕ್ಷಗಾನದ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ “ಕುಂದೇಶ್ವರ”ದಿಂದ ಕಲೆಗೆ ಪ್ರೋತ್ಸಾಹ ನೀಡುವ ಕೆಲಸ ಆಗಿತ್ತಿದೆ ಎಂದರು. ಈ ಸಂದರ್ಭ ಹಿರ್ಗಾನ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಮಹಾವೀರ ಕಟ್ಟಡ, ಮಾಜಿ ಅಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ, ಕಲಾವಿದ ಕದ್ರಿ ನವನೀತ ಶೆಟ್ಟಿ, ಅಜೆಕಾರ್‌ ಬಾಲಕೃಷ್ಣ ಶೆಟ್ಟಿ ಇದ್ದರು.

ಬಳಿಕ ರಕ್ಷಿತ್‌ ಪಡ್ರೆ ನೇತೃತ್ವದಲ್ಲಿ ನಡೆದ ಶ್ವೇತಕುಮಾರ ಚರಿತ್ರೆ ಯಕ್ಷ-ನಾಟಕ ಜನ ಮೆಚ್ಚುಗೆ ಗಳಿಸಿತು.ಹನುಮಗಿರಿ ಮೇಳದ ಕಲಾವಿದ ರಕ್ಷಿತ್‌ ಶೆಟ್ಟಿ ಪಡ್ರೆ ಅವರಿಗೆ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಯನ್ನು ಹಿರ್ಗಾನ ಕುಂದೇಶ್ವರ ಕ್ಷೇತ್ರದಲ್ಲಿ ಕೇಮಾರು ಶ್ರೀ ಪ್ರದಾನ ಮಾಡಿದರು. ಈ ಸಂದರ್ಭ ಜಿತೇಂದ್ರ ಕುಂದೇಶ್ವರ, ಕದ್ರಿ ನವನೀತ ಶೆಟ್ಟಿ, ಅಜೆಕಾರ್‌ ಬಾಲಕೃಷ್ಣ ಶೆಟ್ಟಿ, ಗಂಗಾ ಆರ್.ಭಟ್‌, ಕೃಷ್ಣರಾಜೇಂದ್ರ ಭಟ್‌, ರವೀಂದ್ರ ಭಟ್‌ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments