ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನದ ಎದುರು ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿಯಾಗಿ, ರಾಷ್ಟ್ರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಅದರ ಭಾಗವಾಗಿ ಉಡುಪಿಯ ಕಾಲೇಜಿನಲ್ಲಿ ಘಟನೆ ನಡೆದಿದೆ. ಇದು ಕೇರಳ ಫೈಲ್ಸ್ ರೀತಿಯ ಘಟನೆ. ಇದನ್ನು ಮುಚ್ಚಿಹಾಕಲು ಸರಕಾರ ಯತ್ನಿಸಿದೆ. ಕಾಂಗ್ರೆಸ್ ಬೆಂಬಲದಿಂದ ಭಯೋತ್ಪಾದನಾ ಶಕ್ತಿಗಳು ಮತ್ತೆ ಎದ್ದು ನಿಲ್ಲುತ್ತಿವೆ ಎಂದು ಆರೋಪಿಸಿದರು.
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಮೊದಲಾದವರು ಪಾಲ್ಗೊಂಡಿದ್ದರು.

