ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಿಂದ ಸ್ಕೂಟರ್ ಕಳವು ಮಾಡಿರುವ ಹಾಗೂ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಉಳ್ಳಾಲ ನಿವಾಸಿ ಮಹಮ್ಮದ್ ಫೈಜಲ್ ಆಲಿಯಾಸ್ ತೋಟ ಫೈಜಲ್ (40) ನನ್ನು ಆ.18ರ ಮಂಗಳವಾರ ಉರ್ವ ಪೊಲೀಸರು ಬಂಧಿಸಿದ್ದಾರೆ.
ಈತ ಜು.24ರಂದು ನಗರದ ಕೋಡಿಕಲ್ ನ ಮನೆಯ ಎದುರು ನಿಲ್ಲಿಸಿದ್ದ ಸ್ಕೂಟರ್ ಕಳವು ಮಾಡಿದ್ದ. ಪೊಲೀಸರು ಸಿಸಿ ಕೆಮರಾಗಳನ್ನು ಪರಿಶೀಲಿಸಿ ಆರೋಪಿಯ ಜಾಡು ಪತ್ತೆ ಹಚ್ಚಿ ಚಹರೆಯನ್ನು ಗುರುತಿಸಿಸ ಆರೋಪಿ ಮತ್ತು ಕಳವಾಗಿದ್ದ ಸ್ಕೂಟರ್ ನ್ನು ಪತ್ತೆ ಹಚ್ಚಿದ್ದಾರೆ.
ಆರೋಪಿಯ ವಿರುದ್ದ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 40ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಮಂಗಳೂರು ನಗರದ ಬಂದರು, ಕೊಣಾಜೆ, ಉಳ್ಳಾಲ, ಮೂಡುಬಿದಿರೆ, ಬಂಟ್ವಾಳ ಗ್ರಾಮಾಂತರ ಹಾಗೂ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ದಸ್ತಗಿರಿ ವಾರಂಟ್ ಇದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

