ಬಂಟಕಲ್ : ಶ್ರೀ ಮಧ್ಯ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಸರೆ ಸಮಾಲೋಚನಾ ಘಟಕವು ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್ ಸಿ ಸಿ ಘಟಕದ ಸಹಯೋಗದೊಂದಿಗೆ ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನದ ಅಂಗವಾಗಿ ಬೃಹತ್ ಜಾಗೃತಿ ಜಾಥಾವನ್ನು ಆಯೋಜಿಸಿತ್ತು.
ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಆತ್ಮಹತ್ಯೆ ತಡೆಗಟ್ಟುವಿಕೆಗೆ ಸಂಬಂಧಿಸಿದ ಸಾಮಾಜಿಕ ಕಳಂಕವನ್ನು ನಿವಾರಿಸುವುದು ಜಾಥಾದ ಪ್ರಮುಖ ಉದ್ದೇಶವಾಗಿತ್ತು.

ಸಂಸ್ಥೆಯ ಶೈಕ್ಷಣಿಕ ಡೀನ್ ಡಾ.ಸುದರ್ಶನ್ ರಾವ್ ಅವರು ಶಿರ್ವ ಪೋಲೀಸ್ ಠಾಣೆಯ ಉಪನಿರೀಕ್ಷಕರು ಜಾಥಾಕ್ಕೆ ಚಾಲನೆ ನೀಡಿದರು. ಶಂಕರಪುರ ಬಸ್ ನಿಲ್ದಾಣದಿಂದ ಆರಂಭಗೊಂಡ ರ್ಯಾಲಿಯು ಕಾಲೇಜಿನಲ್ಲಿ ಮುಕ್ತಾಯಗೊಂಡಿತು.
ರಾಲಿಯ ಸಂದರ್ಭದಲ್ಲಿ ಮಾರ್ಗದುದ್ದಕ್ಕೂ ಸಾರ್ವಜನಿಕರಲ್ಲಿ ಮಾನಸಿಕ ಆರೋಗ್ಯ, ಆತ್ಮ ಹತ್ಯೆ ತಡೆಗಟ್ಟುವಿಕೆ ಹಾಗೂ ಅಗತ್ಯ ಇರುವವರಿಗೆ ಸಮಯೋಚಿತ ನೆರವು ಮತ್ತು ಬೆಂಬಲ ನೀಡುವ ಕುರಿತು ಮಹತ್ವದ ಸಂದೇಶವನ್ನು ನೀಡಲಾಯಿತು.
ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಾಗೃತಿ ಮೂಡಿಸುವ ಘೋಷಣೆಗಳು ಹಾಗೂ ಸಂದೇಶಗಳ ಮೂಲಕ ಆತ್ಮಹತ್ಯೆ ತಡೆಗಟ್ಟುವಿಕೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿದರು. ಈ ಮೂಲಕ ಮಾನಸಿಕ ಆರೋಗ್ಯದ ಕುರಿತು ಮುಕ್ತವಾಗಿ ಮಾತನಾಡುವ ವಾತಾವರಣ ನಿರ್ಮಿಸುವುದು ಹಾಗೂ ಸಂಕಷ್ಟದಲ್ಲಿರುವವರಿಗೆ ಸಹಾನುಭೂತಿ ಮತ್ತು ಬೆಂಬಲ ನೀಡುವ ಅಗತ್ಯತೆಯ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.


