ಕಿನ್ನಿಗೋಳಿ: ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಿನ್ನಿಗೋಳಿಯಲ್ಲಿ 2026–27ನೇ ಸಾಲಿನ ಶಿಕ್ಷಕ–ರಕ್ಷಕ ಸಂಘದ ಸಭೆಯು ಶನಿವಾರ ನಡೆಯಿತು.
ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕಿ ಜಯಂತಿ ಶೆಟ್ಟಿ ಮಾತನಾಡಿ, ಇಂದಿನ ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣಗಳು ಹಾಗೂ ಕೃತಕ ಬುದ್ಧಿಮತ್ತೆಯ ಪ್ರಭಾವದ ನಡುವೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ, ಅವರಿಗೆ ಪೋಷಕರು ಮತ್ತು ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡುವುದು ಅಗತ್ಯವೆಂದು ತಿಳಿಸಿದರು.
ಪೋಷಕರು ಹಾಗೂ ಶಿಕ್ಷಕರು ಪರಸ್ಪರ ದೂರುಗಳನ್ನು ನೀಡುವುದಕ್ಕಿಂತ ಮಕ್ಕಳ ಒಳಿತಿಗಾಗಿ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಏಕಾಗ್ರತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.
2025–26ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅವರ ಸಾಧನೆಯನ್ನು ಗೌರವಿಸಲಾಯಿತು.
ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಶರತ್ ಶೆಟ್ಟಿ ಮಾತನಾಡಿ, ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ಸಲಹೆ–ಸೂಚನೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ 2026–27ನೇ ಸಾಲಿನ ಶಿಕ್ಷಕ–ರಕ್ಷಕ ಸಂಘದ ತರಗತಿ ಪ್ರತಿನಿಧಿಗಳ ಆಯ್ಕೆಯೂ ನಡೆಯಿತು.
ಶಾಲೆಯ ಮುಖ್ಯೋಪಾಧ್ಯಾಯಿನಿ ಸುನಿತಾ ಗುರುರಾಜ್ ಅವರು ಪೋಷಕರನ್ನುದ್ದೇಶಿಸಿ ಮಾತನಾಡಿ, ಶಾಲೆಯ ನಿಯಮಗಳು, ಶಿಸ್ತು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರದ ಕುರಿತು ವಿವರಿಸಿದರು.
ಆಡಳಿತ ಮಂಡಳಿಯ ಅಧ್ಯಕ್ಷ ಪ್ರವೀಣ್ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಜತೆ ಕಾರ್ಯದರ್ಶಿ ಸ್ವರಾಜ್ ಶೆಟ್ಟಿ, ಖಜಾಂಚಿಗಳಾದ ದೇವಿದಾಸ್ ಶೆಟ್ಟಿ, ಗೌರವ ಸಲಹೆಗಾರ ವಿಲಿಯಂ ಸಿಕ್ವೇರ, ಸದಸ್ಯರಾದ ಸಾಯಿನಾಥ್ ಶೆಟ್ಟಿ, ಮೆಲ್ವಿನ್ ಡಿಕುನ್ನಾ, ಹರೀಶ್ ಶೆಟ್ಟಿ, ಟಿ.ಹೆಚ್. ಮಯ್ಯದಿ ಹಾಗೂ ಜೋಸ್ಸಿ ಪಿಂಟೋ ಉಪಸ್ಥಿತರಿದ್ದರು.
ಶಿಕ್ಷಕಿ ಪ್ರತಿಮಾ ಸ್ವಾಗತಿಸಿದರು. ಶಿಕ್ಷಕ ಪ್ರಸಾದ್ ವಿ. ಆಚಾರ್ಯ ಅತಿಥಿ ಪರಿಚಯ ಮಾಡಿದರು. ಶಿಕ್ಷಕಿ ನಯನ ವಂದಿಸಿದರು. ಕನ್ನಡ ಅಧ್ಯಾಪಕಿ ದೇವಕಿ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

