ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆರು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಅತಿರುದ್ರ ಮಹಾಯಾಗದ ಏಳನೇ ದಿನವಾದ ಫೆಬ್ರವರಿ 28, 2023 ರ ಮಂಗಳವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ 6 ರಿಂದ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ನಡೆಯಲಿವೆ. ದೇವಸ್ಥಾನದ ಪ್ರಾಂಗಣದಲ್ಲಿ ಬೆಳಗ್ಗೆ 08:30 ರಿಂದ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಭಾಗ್ಯಸೂಕ್ತ ಹೋಮ ನೆರವೇರಲಿವೆ.
ನಂತರ ಸಂಜೆ 6 ರಿಂದ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಮೋಹನ್ ಆಳ್ವ ಅವರಿಂದ ಪ್ರಧಾನ ಭಾಷಣ, ಸಂಜೆ 7 ರಿಂದ ವಿದುಷಿ ರೂಪಾ ಕಿರಣ್, ಹಾಂಕಾಂಗ್ ಅವರಿಂದ ಭರತನಾಟ್ಯ, ರಾತ್ರಿ 8 ರಿಂದ ಮಂಗಳೂರಿನ ಸಾಯಿ ಶಕ್ತಿ ಕಲಾ ತಂಡದ ಪ್ರಸ್ತುತಿಯಲ್ಲಿ “ಬೊಳ್ಳಿ ಮಲೆತ ಶಿವ ಶಕ್ತಿಲು” ತುಳು ಪೌರಾಣಿಕ ನಾಟಕ ಜರುಗಲಿದೆ.

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ ನಿರಂತರವಾಗಿ ಯಾಗ ನಡೆಯಲಿವೆ.
