ಸುಳ್ಯ :ಕೆವಿಜಿ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: ಡಾ. ರೇಣುಕಾಪ್ರಸಾದ್ ಗೆ ಜೀವಾವಧಿ ಶಿಕ್ಷೆ

ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, 6 ಆರೋಪಿಗಳ ಪೈಕಿ ಒರ್ವರನ್ನು ಹೊರತುಪಡಿಸಿ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.
ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ವಾರದ ಹಿಂದೆ ರದ್ದುಗೊಳಿಸಿದ್ದ ಹೈಕೋರ್ಟ್ ಆರೋಪಿಗಳು ದೋಷಿಗಳೆಂದು ತೀರ್ಪು ನೀಡಿತ್ತು. ಡಾ.ರೇಣುಕಾ ಪ್ರಸಾದ್ ಕೆ.ವಿ. ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಶ್ರೀನಿವಾಸ್, ಹರೀಶ್ ಕುಮಾರ್ ಅವರಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಸೆ.27ರಂದು ಈ ಆದೇಶ ನೀಡಿತ್ತು.

ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರು ಆಗಿರುವ ಡಾ.ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್ ಎಲ್ಲರನ್ನೂ ಕೊಲೆ, ಒಳಸಂಚು, ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿ ತೀರ್ಮಾನಿಸಿತ್ತು. ಆದರೆ ಏಳನೇ ಆರೋಪಿಯಾಗಿದ್ದ ಹೆಚ್.ಯು.ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

ಇಂದು ಕೋರ್ಟಿಗೆ ಶರಣಾಗಲು ಆರೋಪಿಗಳಿಗೆ ಸೂಚನೆ ನೀಡಿದ್ದ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿತ್ತು. ಅದರಂತೆ ಅಪರಾಧಿಗಳು, ಪ್ರಕರಣದ ವಿಚಾರಣೆ ನಡೆದಿದ್ದ ಪುತ್ತೂರಿನಲ್ಲಿರುವ ಐದನೇ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿತ್ತು. ಕೋರ್ಟಿಗೆ ಶರಣಾಗಲು ಆರೋಪಿಗಳಿಗೆ ಸೂಚನೆ ನೀಡಿದ್ದ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿತ್ತು.
ವೀಡಿಯೋ ಕಾನ್ಸರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಾಧೀಶರು ಅಪರಾಧಿಗಳ ಅಹವಾಲು ಆಲಿಸಿ ಬಳಿಕ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಅಪರಾಧಿಗಳಾದ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್.ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಯಿತು. ಇಂದು ಹಾಜರಾಗದ ಶರಣ್ ಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿಲ್ಲ.

ಡಾ.ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ. ದಂಡವೂ ವಿಧಿಸಲಾಗಿದ್ದು, ಅದನ್ನು ಕೊಲೆಗೀಡಾದ ರಾಮಕೃಷ್ಣ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.

Related Posts

Leave a Reply

Your email address will not be published.