HomeFresh Newsಸುರತ್ಕಲ್‍ನಲ್ಲಿ ಕಾಂಗ್ರೆಸ್ ವತಿಯಿಂದ ಭರ್ಜರಿ ರೋಡ್ ಶೋ

ಸುರತ್ಕಲ್‍ನಲ್ಲಿ ಕಾಂಗ್ರೆಸ್ ವತಿಯಿಂದ ಭರ್ಜರಿ ರೋಡ್ ಶೋ

ಸುರತ್ಕಲ್: “ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಪಡೆಯಲಿದೆ. ಇನಾಯತ್ ಅಲಿ ಅವರಂತಹ ಸಮರ್ಥ ಅಭ್ಯರ್ಥಿಯನ್ನು ಪಕ್ಷವು ಕಣಕ್ಕಿಳಿಸಿದೆ. ಮತದಾರ ಬಾಂಧವರು ಜಾತಿ ಮತ ಬೇಧ ಮರೆತು ಎಲ್ಲರನ್ನೂ ಸಮಾನವಾಗಿ ಕಾಣುವ ಇನಾಯತ್ ಅಲಿ ಅವರನ್ನು ಬೆಂಬಲಿಸಿ” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದರು.

ಅವರು ಸುರತ್ಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿಯವರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತಾಡಿದರು. “ಕಾಂಗ್ರೆಸ್ ಪಕ್ಷಕ್ಕೆ ಅದರದ್ದೇ ಆದ ಇತಿಹಾಸವಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ಧರ್ಮಗಳ ನಡುವೆ ಕಂದಕ ಸೃಷ್ಟಿಸಿಲ್ಲ. ಜನರನ್ನು ಮತೀಯವಾಗಿ ವಿಂಗಡಿಸಿಲ್ಲ. ಹೀಗಾಗಿ ಶಾಂತಿ ಮತ್ತು ಸಹಬಾಳ್ವೆಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇನಾಯತ್ ಅಲಿ ಅವರಿಗೆ ನೀವು ಮತ ನೀಡಿ” ಎಂದು ಕರೆ ನೀಡಿದರು.

ಬಳಿಕ ಮಾತಾಡಿದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು, “ನಾನು ಬಾಲ್ಯದಲ್ಲಿ ಕಷ್ಟಪಟ್ಟು ಕಲಿತು ಎನ್ ಎಸ್ ಯು ಐ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟೆ. ಆಸ್ಕರ್ ಫೆರ್ನಾಂಡಿಸ್ ಹಾಗೂ ಜನಾರ್ಧನ ಪೂಜಾರಿ ನನ್ನ ಗುರುಗಳು. ನನ್ನ ವಿರುದ್ಧ ಇಂದು ಬಿಜೆಪಿ ಜೊತೆಗೆ ಕೈಜೋಡಿಸಿದ ಕೆಲವರಿಂದ ಷಡ್ಯಂತ್ರ ನಡೆಯುತ್ತಿದೆ. ಶ್ರೀಮಂತ ಉದ್ಯಮಿಗಳ ಜೊತೆ ಸೇರಿಕೊಂಡು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಹಣ ಕೊಟ್ಟು ಟಿಕೆಟ್ ತಗೊಂಡು ಬಂದಿದ್ದಾಗಿ ಹೇಳುತ್ತಾರೆ. ಹಾಗೊಂದು ವೇಳೆ ನಿಜವೇ ಆದಲ್ಲಿ ಪುರಾವೆಯನ್ನು ಬಹಿರಂಗಪಡಿಸಲಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದರು.

ರಮೇಶ್ ಚೆನ್ನಿತ್ತಲ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗುರುಪುರ ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಂಬಳಿ, ಸುರತ್ಕಲ್ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ, ಸುರತ್ಕಲ್ ಬ್ಲಾಕ್ ಅಧ್ಯಕ್ಷ ಉಮೇಶ್ ದಂಡೆಕೇರಿ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments