HomeFresh Newsಉತ್ತರ ಕನ್ನಡ: ಶಿರಸಿಯಲ್ಲಿ ಭೀಕರ ರಸ್ತೆ ಅಪಘಾತ ; ಮಂಗಳೂರಿನ ಕಂದಾವರ ಮೂಲದ ನಾಲ್ವರ ದುರ್ಮರಣ

ಉತ್ತರ ಕನ್ನಡ: ಶಿರಸಿಯಲ್ಲಿ ಭೀಕರ ರಸ್ತೆ ಅಪಘಾತ ; ಮಂಗಳೂರಿನ ಕಂದಾವರ ಮೂಲದ ನಾಲ್ವರ ದುರ್ಮರಣ

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಕುಮಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರು ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದ ಮದುವೆಗೆ ಆಗಮಿಸುತ್ತಿದ್ದ ಮಂಗಳೂರಿನ ಕಂದಾವರ ಮೂಲದ ರಾಮಕೃಷ್ಣ ಬಾಬುರಾವ್ (71), ವಿದ್ಯಾಲಕ್ಷ್ಮೀ ರಾಮಕೃಷ್ಣ (65), ಪುಷ್ಪಾ ಮೋಹನ ರಾವ್ (62), ಸುಹಾಸ್ ಗಣೇಶ ರಾವ್ (30), ಹಾಗೂ ಚೆನ್ನೈನ ಅರವಿಂದ(30) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದರೆ. ಮತ್ತೊಬ್ಬರು ಅವರ ಸ್ನೇಹಿತರು ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗವೂ ಸಂಪೂರ್ಣ ಜಖಂಗೊಂಡಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments