ಕಾಪು: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕಾಪು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿ.ಬಿ.ಜಿ ರಾಮ್ ಜಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ವಿಜಯ್ ಕುಮಾರ್ ತಿಳಿಸಿದ್ದಾರೆ.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಯು ಜಲ ಭದ್ರತೆ, ಗ್ರಾಮೀಣ ಮೂಲಸೌಕರ್ಯ, ಗ್ರಾಮೀಣ ಜೀವನೋಪಾಯ ಹಾಗೂ ವಿಪತ್ತು ನಿರ್ವಹಣೆ ಎಂಬ ನಾಲ್ಕು ಪ್ರಮುಖ ಆಯಾಮಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.
ಜಲ ಭದ್ರತೆ ವಿಭಾಗದಲ್ಲಿ ಬೋರ್ವೆಲ್ ರೀಚಾರ್ಜ್ ಪಿಟ್, ಕೃಷಿ ಹೊಂಡ, ಜಲ ಪುನಶ್ಚೇತನ ಹಾಗೂ ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತದೆ. ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಯಡಿ ರಸ್ತೆ, ಚರಂಡಿ, ಕುಡಿಯುವ ನೀರು, ಶಾಲೆ, ಅಂಗನವಾಡಿ ಹಾಗೂ ಸಮುದಾಯ ಕಟ್ಟಡಗಳ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ.
ಗ್ರಾಮೀಣ ಜೀವನೋಪಾಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೃಷಿ ಬಾವಿ, ದನದ ಹಟ್ಟಿ, ಕೋಳಿ ಸಾಕಾಣಿಕೆ ಶೆಡ್, ಕುರಿ-ಮೇಕೆ ಶೆಡ್, ಹಂದಿ ಶೆಡ್, ಗೊಬ್ಬರ ಗುಂಡಿ, ಎರೆಹುಳು ತೊಟ್ಟಿ ಹಾಗೂ ತೋಟಗಾರಿಕೆ ಅಭಿವೃದ್ಧಿಗೆ ನೆರವು ಒದಗಿಸಲಾಗುತ್ತದೆ. ವಿಪತ್ತು ನಿರ್ವಹಣೆ ವಿಭಾಗದಲ್ಲಿ ಪ್ರವಾಹ ನಿಯಂತ್ರಣ, ಮಳೆನೀರು ಕೊಯ್ಲು ಹಾಗೂ ನೈಸರ್ಗಿಕ ವಿಕೋಪ ತಡೆ ಕಾಮಗಾರಿಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ.
ಯೋಜನೆಯಡಿ ಅರ್ಜಿ ಸಲ್ಲಿಸಿ ಅನುಮೋದನೆ ಪಡೆದಿರುವ ಫಲಾನುಭವಿಗಳು ತಮ್ಮ ವೈಯಕ್ತಿಕ ಜೀವನೋಪಾಯ ಕಾಮಗಾರಿಗಳನ್ನು ಕೂಡಲೇ ಆರಂಭಿಸಬಹುದಾಗಿದೆ. ವಿಶೇಷವಾಗಿ ಜಲ ಭದ್ರತೆ ಹಾಗೂ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲಾಗುವುದು ಎಂದು ವಿಜಯ್ ಕುಮಾರ್ ತಿಳಿಸಿದರು.
ಯೋಜನೆಯು ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.


