ರಾಜ್ಯದ ಸಮಸ್ತ ಮತದಾರರಿಗೆ ಒಂದು ಮುಖ್ಯ ಮಾಹಿತಿ. ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಇದು ಸುವರ್ಣಾವಕಾಶ. ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ಸಿಗಲಿದ್ದು, ಜೂನ್ 30ರಿಂದಲೇ ಈ ಪ್ರಕ್ರಿಯೆ ಆರಂಭವಾಗಲಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯ ಆರಂಭವಾಗುತ್ತಿದೆ. ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಈ ವೇಳೆ ಮತದಾರರು ಅಗತ್ಯ ಮಾಹಿತಿಯನ್ನು ನೀಡಿ ಅರ್ಜಿಯನ್ನು ಭರ್ತಿ ಮಾಡುವುದು ಕಡ್ಡಾಯವಾಗಿದೆ.
ಈ ಅಭಿಯಾನದಲ್ಲಿ ಮತದಾರರ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಕಾರ್ಯ ನಡೆಯಲಿದೆ. ಬಿಎಲ್ಒಗಳು ನೀಡುವ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಜುಲೈ 29ರವರೆಗೆ ಮಾಹಿತಿ ಸಂಗ್ರಹ ನಡೆಯಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಬಳಿಕ ಪರಿಶೀಲನೆ ಪೂರ್ಣಗೊಂಡು ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.
ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ವಿಳಾಸ ದೃಢೀಕರಣ ದಾಖಲೆ, ಕುಟುಂಬದ ಸದಸ್ಯರ ಗುರುತಿನ ದಾಖಲೆ ಹಾಗೂ ಪಾಸ್ಪೋರ್ಟ್ ಗಾತ್ರದ ಭಾವಚಿತ್ರವನ್ನು ಸಿದ್ಧವಾಗಿಟ್ಟುಕೊಳ್ಳುವುದು ಅಗತ್ಯ.
ಅರ್ಜಿ ಸಲ್ಲಿಸದೇ ಅಥವಾ ಅಗತ್ಯ ದಾಖಲೆಗಳನ್ನು ನೀಡದೇ ಇದ್ದರೆ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡುವ ಸಾಧ್ಯತೆ ಇದೆ. ಆದ್ದರಿಂದ ಬಿಎಲ್ಒಗಳು ಭೇಟಿ ನೀಡುವ ವೇಳೆ ಸಂಪೂರ್ಣ ಸಹಕಾರ ನೀಡಿ ನಿಮ್ಮ ಮತದಾನದ ಹಕ್ಕು ಸುರಕ್ಷಿತವಾಗಿರಿಸಿಕೊಳ್ಳಿ.

